ಇಸಳೂರು ಗ್ರಾಮ ಪಂಚಾಯತ್ನಲ್ಲಿ ವೃಕ್ಷಾರೋಪಣ: ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸಬಲೀಕರಣ – ಶಾಸಕ ಭೀಮಣ್ಣ ನಾಯ್ಕ
ಶಿರಸಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ 3 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಶಿರಸಿ ತಾಲೂಕಾ ಗ್ಯಾರಂಟಿ ಸಮಿತಿ ವತಿಯಿಂದ ತಾಲೂಕಿನ ಇಸಳೂರು ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಮಾನ್ಯ ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕರು, “ಗೃಹಲಕ್ಷ್ಮಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಲಕ್ಷಾಂತರ ಮಹಿಳೆಯರ ಬದುಕಿಗೆ ಆಸರೆಯಾಗಿದೆ. ಪ್ರತಿ ತಿಂಗಳು ಮಹಿಳೆಯರ ಖಾತೆಗೆ ತಲುಪುತ್ತಿರುವ ಹಣವು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿದ್ದು, ಆರ್ಥಿಕ ಸಬಲೀಕರಣಕ್ಕೆ ದಾರಿದೀಪವಾಗಿದೆ. ಗೃಹಲಕ್ಷ್ಮಿಯ ಯಶಸ್ಸಿನ ಸಂಭ್ರಮವನ್ನು ಪ್ರಕೃತಿಯನ್ನು ರಕ್ಷಿಸುವ ವೃಕ್ಷಾರೋಪಣದಂತಹ ಸತ್ಕಾರ್ಯದ ಮೂಲಕ ಆಚರಿಸುತ್ತಿರುವುದು ಶ್ಲಾಘನೀಯ,” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗುತ್ತಿರುವ ಅನುಕೂಲಗಳು ಹಾಗೂ ಅವರ ಜೀವನಮಟ್ಟದಲ್ಲಿ ಕಂಡುಬಂದಿರುವ ಸಕಾರಾತ್ಮಕ ಬದಲಾವಣೆಗಳ ಕುರಿತು ಶಾಸಕರು ಸುದೀರ್ಘವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ಶಿರಸಿ ತಾಲೂಕಾ ಗ್ಯಾರಂಟಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ತಾಲೂಕು ಕಾರ್ಯನಿರ್ವಹಣಾ ಅಧಿಕಾರಿಗಳು, ಪಿಡಿಒ, ಪಂಚಾಯತ್ ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು, ಪ್ರಮುಖರು, ಗ್ರಾಮಸ್ಥರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.
